ಧಾರವಾಡದ ಮಹೇಬೂಬ್ ನಗರದಲ್ಲಿ L&T ಸಂಸ್ಥೆಯ ಕಾಮಗಾರಿ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಆರಂಭವಾಗಿ ಸುಮಾರು ಒಂದು ವರ್ಷ ಕಳೆದರೂ ಕೆಲಸ ಪೂರ್ಣಗೊಳ್ಳದಿರುವುದರಿಂದ ರಸ್ತೆಗಳು ಅವ್ಯವಸ್ಥೆಯಾಗಿ, ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಅಭಿವೃದ್ಧಿ ಕಾಮಗಾರಿಯ ಹೆಸರಿನಲ್ಲಿ ರಸ್ತೆ ಅಗೆದು ಹಾಕಲಾಗಿದ್ದು, ಹಲವು ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಳ್ಳದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ರಸ್ತೆಯಲ್ಲಿ ನಿರ್ಮಾಣವಾಗಿರುವ ತೆಗ್ಗು-ಗುಂಡಿಗಳಿಂದ ಸಾರ್ವಜನಿಕರು ಪದೇ ಪದೇ ತೊಂದರೆಗೆ ಸಿಲುಕುತ್ತಿದ್ದಾರೆ. ಕೆಲ ದಿನಗಳ ಹಿಂದೆ ಒಂದು ಮಗು ತೆಗ್ಗಿಗೆ ಬಿದ್ದ ಘಟನೆ ನಡೆದಿದ್ದು, ಅದೇ ರೀತಿ ಬೈಕ್ನಲ್ಲಿ ತೆರಳುತ್ತಿದ್ದ ಗಂಡ-ಹೆಂಡತಿ ಬೈಕ್ ಸ್ಕಿಡ್ ಆಗಿ ತೆಗ್ಗಿಗೆ ಬಿದ್ದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದೀಗ ಇಂದು ಮತ್ತೊಂದು ಘಟನೆ ನಡೆದಿದ್ದು, ಕಲ್ಲು ಸಾಗಿಸುತ್ತಿದ್ದ ಟ್ರಕ್ವೊಂದು ರಸ್ತೆ ಅವ್ಯವಸ್ಥೆಯಿಂದಾಗಿ ಪಲ್ಟಿಯಾಗಿದೆ ಎನ್ನಲಾಗಿದೆ.
ಇಷ್ಟೇ ಅಲ್ಲದೆ, ಮಳೆ ಬಂದಾಗ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತದೆ. ಮಳೆ ನೀರು ಹಾಗೂ ಗಟಾರ್ ನೀರು ಸೇರಿ ಮನೆಗಳಿಗೆ ನುಗ್ಗುತ್ತಿರುವುದರಿಂದ ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಸುಮಾರು ಒಂದು ವರ್ಷದಿಂದ ಕಾಮಗಾರಿ ನಡೆಯುತ್ತಿದೆ. ಆದರೆ ಇದುವರೆಗೂ ರಸ್ತೆ ಸರಿಯಾಗಿಲ್ಲ. ಮಕ್ಕಳು, ವೃದ್ಧರು ಹಾಗೂ ವಾಹನ ಸವಾರರು ಪ್ರತಿದಿನ ಭಯದಲ್ಲೇ ಓಡಾಡುವಂತಾಗಿದೆ. ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು.”
ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದರೂ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸ್ಥಳೀಯರ ಆರೋಪ.
ರಸ್ತೆ, ಚರಂಡಿ ಹಾಗೂ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳಿಗೆ ಯಾರು ಜವಾಬ್ದಾರರು? ಸಾರ್ವಜನಿಕರ ಸುರಕ್ಷತೆಗೆ ಯಾರು ಹೊಣೆ? ಎಂಬ ಪ್ರಶ್ನೆಯನ್ನು ಸ್ಥಳೀಯರು ಮುಂದಿಟ್ಟಿದ್ದಾರೆ.
ಕೂಡಲೇ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡದಿದ್ದರೆ L&T ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.
ಒಟ್ಟಿನಲ್ಲಿ ಮಹೇಬೂಬ್ ನಗರದ ಜನರ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ L&T ಸಂಸ್ಥೆ ಕೂಡಲೇ ಸ್ಪಂದಿಸಿ, ರಸ್ತೆ ಮತ್ತು ಚರಂಡಿ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ದೃಷ್ಟಿಯಿಂದ ಈ ಸಮಸ್ಯೆಗೆ ಶೀಘ್ರ ಪರಿಹಾರ ಸಿಗಬೇಕಿದೆ.




