ಹುಬ್ಬಳ್ಳಿ: ನೂತನವಾಗಿ ಹುಬ್ಬಳ್ಳಿ-ಧಾರವಾಡ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸದಾನಂದ ಡಂಗನವರ್, ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ಜುಟ್ಟಲ್ ಹಾಗೂ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಬರ್ಟ್ ದತ್ತಾಪುರಿ ಅವರು ತಮ್ಮ ಅಭಿಮಾನಿ ಬಳಗದೊಂದಿಗೆ ಕಾರ್ಗಿಲ್ ತೋಪಕ್ಕೆ ಭೇಟಿ ನೀಡಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ ವೀರ ಯೋಧರ ತ್ಯಾಗ ಮತ್ತು ದೇಶಸೇವೆಯನ್ನು ಸ್ಮರಿಸಿದ ಗಣ್ಯರು, ಕಾರ್ಗಿಲ್ ತೋಪದಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಯೋಧರ ಬಲಿದಾನವನ್ನು ಸದಾ ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಅವರ ಈ ಗೌರವ ಸಲ್ಲಿಕೆಯ ಕಾರ್ಯವು ಶ್ಲಾಘನೀಯವಾಗಿದೆ ಎಂದು ಮಾಜಿ ಸೈನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಮ್ಮ ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ ಹಾಗೂ ಸಾರ್ವಜನಿಕ ಸೇವೆಯ ಮೂಲಕ ಮಹತ್ವದ ಸ್ಥಾನಗಳಿಗೆ ಆಯ್ಕೆಯಾಗಿರುವ ಸದಾನಂದ ಡಂಗನವರ್, ಚಂದ್ರಶೇಖರ್ ಜುಟ್ಟಲ್ ಹಾಗೂ ರಾಬರ್ಟ್ ದತ್ತಾಪುರಿ ಅವರನ್ನು ಮಾಜಿ ಸೈನಿಕರ ಟ್ರಸ್ಟ್ ವತಿಯಿಂದ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು. ಟ್ರಸ್ಟ್ನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮಾಜಿ ಸೈನಿಕರು ಶಾಲು, ಸ್ಮರಣಿಕೆ ನೀಡಿ ಅವರಿಗೆ ಗೌರವ ಸಲ್ಲಿಸಿದರು.
ಮುಂದಿನ ದಿನಗಳಲ್ಲಿ ತಮ್ಮ ಹೊಸ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಜನಪರ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಉತ್ತಮ ಸೇವೆ ಸಲ್ಲಿಸಲಿ ಎಂದು ಮಾಜಿ ಸೈನಿಕರ ಟ್ರಸ್ಟ್ ವತಿಯಿಂದ ಶುಭ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸೈನಿಕರ ಟ್ರಸ್ಟ್ನ ಅಧ್ಯಕ್ಷರು, ಪದಾಧಿಕಾರಿಗಳು, ಮಾಜಿ ಸೈನಿಕರು, ಅಭಿಮಾನಿ ಬಳಗದ ಸದಸ್ಯರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.




