ಧಾರವಾಡ, ಸೆಪ್ಟೆಂಬರ್ 16: ಹುಬ್ಬಳ್ಳಿಯ ಅಸಾರ ಓಣಿಯಲ್ಲಿರುವ ಪುರಾತನ ಶ್ರೀ ಭವಾನಿ ಶಂಕರ ದೇವಸ್ಥಾನದ ಆವರಣದ ಪುಷ್ಕರಣಿ ವಿವಾದ ಇದೀಗ ಮತ್ತಷ್ಟು ತೀವ್ರಗೊಂಡಿದೆ. ಪುಷ್ಕರಣಿಯನ್ನು ಹಾಳುಗೆಡವಿ, ಸಾರ್ವಜನಿಕರ ತೆರಿಗೆ ಹಣ ಪೋಲು ಮಾಡಿದ್ದಾರೆ ಎಂದು ಆರೋಪಿಸಿ ಶ್ರೀರಾಮ ಸೇನೆ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ವಿರುದ್ಧ ಧಾರವಾಡ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ದೇವಸ್ಥಾನವು ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಅನುಮತಿ ಪಡೆಯದೇ ರಸ್ತೆ ಹಾಗೂ ಚರಂಡಿ ಕಾಮಗಾರಿ ನಡೆಸಲಾಗಿದೆ ಎಂದು ಸಂಘಟನೆ ಆರೋಪಿಸಿದೆ. ಪುರಾತನ ಪುಷ್ಕರಣಿಯನ್ನು ಮುಚ್ಚಿ ರಸ್ತೆ ನಿರ್ಮಿಸಿರುವುದು ದೇವಸ್ಥಾನದ ಐತಿಹಾಸಿಕ ಮಹತ್ವಕ್ಕೆ ಧಕ್ಕೆ ತಂದಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೂ ನೋವುಂಟು ಮಾಡಿದೆ ಎಂದು ಶ್ರೀರಾಮ ಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಪಾಲಿಕೆ ಆಯುಕ್ತರ ಪಾತ್ರದ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.
ಇನ್ನು ಪುಷ್ಕರಣಿ ವಿಚಾರವಾಗಿ ನಡೆದ ಪ್ರತಿಭಟನೆ ವೇಳೆ ಸುಮಾರು 1,500 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಭಾರೀ ಪೊಲೀಸ್ ಬಂದೋಬಸ್ತ್ಗೆ ಸರ್ಕಾರದ ಬೊಕ್ಕಸದಿಂದ ಕೋಟ್ಯಂತರ ರೂಪಾಯಿ ವೆಚ್ಚವಾಗಿದ್ದು, ಈ ಸಾರ್ವಜನಿಕ ಹಣ ಪೋಲಾಗಲು ಪಾಲಿಕೆ ಆಡಳಿತದ ನಿರ್ಲಕ್ಷ್ಯವೇ ಕಾರಣ ಎಂದು ಸಂಘಟನೆ ಆರೋಪಿಸಿದೆ. ಉಂಟಾಗಿರುವ ಹೆಚ್ಚುವರಿ ವೆಚ್ಚದ ಹೊಣೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಂದಲೇ ವಸೂಲಿ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ರಾಜಕೀಯ ನಾಯಕರ ವಿರುದ್ಧ ಹೋರಾಟ ನಡೆಸುತ್ತಿದ್ದ ಹಿಂದೂಪರ ಸಂಘಟನೆಗಳು ಇದೀಗ ನೇರವಾಗಿ ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ಲೋಕಾಯುಕ್ತ ಮೆಟ್ಟಿಲೇರಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಕಾಮಗಾರಿಯ ಅನುಮತಿ, ಪುಷ್ಕರಣಿಯ ಸ್ಥಿತಿ ಹಾಗೂ ಪೊಲೀಸ್ ಬಂದೋಬಸ್ತ್ಗೆ ತಗುಲಿದ ವೆಚ್ಚದ ಕುರಿತು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಲಿದ್ದಾರೆಯೇ ಎಂಬುದು ಇದೀಗ ಕುತೂಹಲ ಮೂಡಿಸಿದೆ.




