ಧಾರವಾಡ: ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳು ಬಾಕಿ… ಧಾರವಾಡ ಜಿಲ್ಲಾಡಳಿತ ಪಿಓಪಿ ಗಣೇಶ ಮೂರ್ತಿಗಳ ಬಳಕೆ ಹಾಗೂ ಮಾರಾಟಕ್ಕೆ ನಿಷೇಧ ಹೇರಿದೆ. ಆದರೂ ಧಾರವಾಡದ ರವಿವಾರಪೇಟೆಯಲ್ಲಿ ನಿಷೇಧಿತ ಪಿಓಪಿ ಗಣೇಶ ಮೂರ್ತಿಗಳ ತಯಾರಿ ಹಾಗೂ ಮಾರಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ನ್ಯೂಸ್ 88 ಕರ್ನಾಟಕಕ್ಕೆ ಲಭಿಸಿದ ಮಾಹಿತಿಯ ಆಧಾರದಲ್ಲಿ ಸ್ಥಳಕ್ಕೆ ತೆರಳಿದ ವೇಳೆ ಗೂಡ್ಸ್ ವಾಹನದಲ್ಲಿ ಹತ್ತಾರು ಪಿಓಪಿ ಗಣೇಶ ಮೂರ್ತಿಗಳನ್ನು ಗೋದಾಮಿನಿಂದ ತಂದು ಇಳಿಸಲಾಗುತ್ತಿತ್ತು. ಈ ವೇಳೆ ಪ್ರಶ್ನಿಸಿದಾಗ ಮಾಧ್ಯಮದವರ ಮೇಲೆಯೇ ದಬ್ಬಾಳಿಕೆಗೆ ಮುಂದಾದ ಘಟನೆ ನಡೆದಿದೆ.
ಹಳೆಯ ಹಾಗೂ ಮುಕ್ಕಾದ ಪಿಓಪಿ ಮೂರ್ತಿಗಳನ್ನು ಮತ್ತೆ ಸರಿಪಡಿಸಿ ಮಾರಾಟಕ್ಕೆ ಸಿದ್ಧಪಡಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಪಿಓಪಿ ಗಣೇಶ ಮೂರ್ತಿಗಳು ಇರುವುದು ದೃಢಪಟ್ಟಿದ್ದು, ಮೂರ್ತಿಗಳನ್ನು ಪಾಲಿಕೆ ವಾಹನದಲ್ಲಿ ವಶಕ್ಕೆ ಪಡೆಯಲಾಯಿತು.
ಇದೇ ವೇಳೆ ಅಕ್ಕಪಕ್ಕದ ಗಣೇಶ ಮೂರ್ತಿ ಮಾರಾಟ ಮಳಿಗೆಗಳಿಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಕಡ್ಡಾಯವಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನೇ ಮಾರಾಟ ಮಾಡುವಂತೆ ಸೂಚನೆ ನೀಡಿದರು.
ಸ್ಥಳೀಯವಾಗಿ ರಾಜಕೀಯ ಪ್ರಭಾವ ಹೊಂದಿರುವುದಾಗಿ ಹೇಳಲಾಗುತ್ತಿರುವ ಯಲ್ಲಪ್ಪ ಸವಣೂರು ಅವರು ಈ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದರು ಎಂಬ ಆರೋಪವೂ ಕೇಳಿಬಂದಿದೆ. ಅಧಿಕಾರಿಗಳ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆದಿದೆ ಎಂಬ ಆರೋಪವೂ ಇದೆ. ಆದರೆ ಪಾಲಿಕೆ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಮೂರ್ತಿಗಳನ್ನು ಸೀಜ್ ಮಾಡಿರುವುದು ಗಮನಾರ್ಹ.
ಒಟ್ಟಿನಲ್ಲಿ ಧಾರವಾಡ ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲೆಯಾದ್ಯಂತ ಪಿಓಪಿ ಗಣೇಶ ಮೂರ್ತಿಗಳ ತಯಾರಿ, ಸಂಗ್ರಹ ಮತ್ತು ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ.




